ಗದಗ ಅಗಸ್ಟ 30 ; ರಾಜ್ಯ ಸರ್ಕಾರದ 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೊಷಿಸಲಾಗಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ ಹಾಗೂ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ 2024ರಲ್ಲಿ ಅನುಷ್ಟಾನಗೊಳಿಸಲಾಗಿದೆ. ಎನಿವೇರ್ ನೊಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಗದಗ ಜಿಲ್ಲೆಯ ಉಪನೊಂದಣಿ ಕಚೇರಿಗಳಿಗೂ ಎನಿವೇರ್ ನೋಂದಣಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೊಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೊಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮಿಪದಲ್ಲಿರುವ ಉಪನೊಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೊಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೊಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೇ ಸಮಯವು ಸಹ ಉಳಿಯುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಸಾರ್ವಜನಿಕರು ಎನಿವೇರ್ ನೊಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೊಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.