ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಸಚಿವ ಎಚ್.ಕೆ.ಪಾಟೀಲ ಚಾಲನೆ
ಗದಗ ಸೆಪ್ಟೆಂಬರ್ 18: ಪ್ರಜೆಯೇ ನಿಜವಾದ ಪ್ರಭು. ಪ್ರಜೆಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಕಾರ್ಯವಾಗಲಿ. ಅನವಶ್ಯಕ ಅಲೆದಾಟ ತಪ್ಪಿಸುವುದೇ ಜನತಾದರ್ಶನ ಕಾರ್ಯಕ್ರಮದ ಧ್ಯೇಯೋದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.

ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಕಳೆದ ವರ್ಷ ಸೆಪ್ಟೆಂಬರ್ 30 ರಂದು ಮಾಡಲಾಗಿತ್ತು. ಅಂದು ಸಾರ್ವಜನಿಕರು ಅನೇಕ ತರಹದ ಅಹವಾಲುಗಳನ್ನು ಹೊತ್ತು ಆಗಮಿಸಿ ಒಟ್ಟು 920 ಅರ್ಜಿಗಳನ್ನು ಸಲ್ಲಿಸಿದ್ದರು. ಹಲವಾರು ಅಹವಾಲುಗಳಿಗೆ ಪರಿಹಾರ ಕಂಡುಕೊಳ್ಲಲಾಗಿದೆ. 830 ಅಹವಾಲುಗಳಿಗೆ ತಾರ್ಕಿಕ ಅಂತ್ಯ ನೀಡಲಾಗಿದೆ. ಬಾಕಿ ಉಳಿದ 83 ಅಹವಾಲುಗಳಲ್ಲಿ 40 ಅಹವಾಲುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಉಳಿದ ಅಹವಾಲುಗಳು ವೈಯಕ್ತಿಕ ಹಾಗೂ ಅಪೂರ್ಣ ದಾಖಲೆಗಳನ್ನು ಒಳಗೊಂಡಿವೆ. ಮತ್ತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವುದರಿಮದ ಪರಿಹಾರ ಪ್ರಯತ್ನ ವಿಳಂಬವಾಗಿದೆ ಎಂದರು.ಅವುಗಳ ಪರಿಹಾರಕ್ಕೂ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದರು.

ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಗದಗ ತಾಲೂಕು ಕಚೇರಿಯಲ್ಲಿರುವ ಬಾಕಿ ಇರುವ ಅರ್ಜಿಗಳ ವಿಚಾರಣೆ ಕೈಗೊಳ್ಳುವ ಮೂಲಕ ಪರಿಹಾರಕ್ಕೆ ಯತ್ನಿಸಲಾಗುವುದು. ಜೊತೆಗೆ ಜಿಲ್ಲೆಯ ಇನ್ನೊಂದು ತಾಲೂಕು ಕಚೇರಿಯಲ್ಲಿ ಬಾಕಿ ಇರುವ ಅರ್ಜಿಗಳಿಗೂ ಸಹ ಈ ಕಾರ್ಯಕ್ರಮದಲ್ಲಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತಾದರ್ಶನ ಕಾರ್ಯಕ್ರಮದ ಬಗ್ಗೆ ವಿಶೇಷ ಗಮನಹರಿಸುತ್ತಾರೆ. ಜಿಲ್ಲೆಗಳಲ್ಲಿ ಜರುಗುವ ಜನತಾದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಿಯಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಉತ್ಸುಕರಾಗಿದ್ದಾರೆ ಎಂದು ನುಡಿದರು.
ಸರ್ಕಾರ ಜಾರಿಗೊಳಿಸಿದ ಪಂಚಗ್ಯಾರAಟಿಗಳು ರಾಜ್ಯದಲ್ಲಿಯೇ ಗದಗ ಜಿಲ್ಲೆ ಅನುಷ್ಟಾನದಲ್ಲಿ ಮುಂಚೂಣಿಯಲ್ಲಿದೆ. ಶೇ 99.2 ರಷ್ಟು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮೂಲಕ ಸಾಧನೆ ಮಾಡಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಹೇಳಿದರು.
ರಾಜ್ಯ ಖನಿಜ ನಿಗಮದ ಅಧ್ಯಕ್ಷರೂ ಆಗಿರುವ ರೋಣ ಶಾಸಕ ಜಿ.ಎಸ್.ಪಾಟೀಲ ಅವರು ಮಾತನಾಡಿ ಜನತಾ ದರ್ಶನ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವೇದಿಕೆಯಾಗಿದೆ. ವಿನಾಕಾರಣ ವಿಳಂಭಧೋರಣೆ ತಪ್ಪಿಸುವ ಮೂಲಕ ತುರ್ತಾಗಿ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸುವುದಾಗಿದೆ. ಇದರ ಸಂಪೂರ್ಣ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆಯಬೇಕೆಂದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ಅತಿಥಿಗಳನ್ನು ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಗಂಗಪ್ಪ ಎಂ ವಂದಿಸಿದರು. ದತ್ತ ಪ್ರಸನ್ನ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.